Skip to main content
ಈ ನಮ್ಮ ಕನ್ನಡನಾಡು
News

ನಾಗೇಂದ್ರ ಕಣ್ಣೀರನ್ನು ಜನ ನಂಬುವುದಿಲ್ಲ: ಗಾಲಿ ಜನಾರ್ಧನ ರೆಡ್ಡಿ

19 Oct 2024

ಬಳ್ಳಾರಿ: ಮಾಜಿ ಸಚಿವ, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರು ಗುರುವಾರದಂದು ವಾಲ್ಮೀಕಿ ಜಯಂತಿಯ ಕಾರ್ಯಕ್ರಮದಲ್ಲಿ ಕಣ್ಣೀರು ಹಾಕಿರುವುದು, ತಾನು ಮಾಡಿದ ತಪ್ಪಿಗಾಗಿ ಹಾಕಿದ ಪಶ್ಚಾತ್ತಾಪದ ಕಣ್ಣೀರು. ಅವರ ಕಣ್ಣೀರನ್ನು ಜಿಲ್ಲೆಯ ಜನರು ಯಾರೂ ನಂಬುವ ಸ್ಥಿತಿಯಲ್ಲಿ ಇಲ್ಲ ಎಂದು ಬಿಜೆಪಿ ಧುರೀಣ, ಗಂಗಾವತಿ ಶಾಸಕ ಜಿ.ಜನಾರ್ದನರೆಡ್ಡಿ ಹೇಳಿದ್ದಾರೆ.

ಸಂಡೂರು ಪಟ್ಟಣದಲ್ಲಿ ಉಪ ಚುನಾವಣೆ ಪ್ರಯುಕ್ತ ನೂತನ ಮನೆ ಹಾಗೂ ಪ್ರಚಾರ ಕಛೇರಿಗೆ ಪೂಜೆ ನೆರವೇರಿಸಿದ ನಂತರ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಗೇಂದ್ರ ಏನೇ ಹೇಳಿದರೂ, ಕಣ್ಣೀರು ಹಾಕಿದರೂ ಜನರು ನಂಬುವುದಿಲ್ಲ. ಕಾಂಗ್ರೆಸ್ ಪಕ್ಷವು ಅವರನ್ನು ಸಂಪೂರ್ಣವಾಗಿ ಬಳಕೆ ಮಾಡಿಕೊಂಡಿದೆ ಎಂದರು.

ವಾಲ್ಮೀಕಿ ನಿಗಮದ ಹಗರಣದಲ್ಲಿ ಮಾಡಿದ ತಪ್ಪಿಗೆ ಕಣ್ಣೀರು ಹಾಕಿರಬಹುದು. ಯಾರೇ ಆಗಲೀ, ತಪ್ಪು ಮಾಡಿದರೆ ಶಿಕ್ಷೆ ಅನುಭವಿಸಲೇಬೇಕು. ರಾಜಕೀಯವಾಗಿ ನಾಗೇಂದ್ರರನ್ನು ಬೆಳೆಸಿದ್ದೇ ನಾವು. ಇಂತಹವರನ್ನು ನಾವು ಬೆಳೆಸಿದ್ದೇವೆಯೇ ಎಂದು ನಾನು ಈಗ ಪಶ್ಚಾತ್ತಾಪ ಪಡುವಂತಾಗಿದೆ. ವಾಲ್ಮೀಕಿ ನಿಗಮದ ಹಗರಣ ಹಾಗೂ ಅದರಲ್ಲಿ ನಾಗೇಂದ್ರ ಪಾತ್ರದ ಬಗೆ `ಇಡಿ’ ಸಲ್ಲಿಸಿರುವ `ಚಾರ್ಜ್‍ಶೀಟ್’ಗಳಲ್ಲಿನ ವಿವರಗಳೆಲ್ಲವನ್ನೂ ಪ್ರತ್ಯೇಕವಾಗಿ ಪುಸ್ತಕದ (ಬುಕ್‍ಲೆಟ್) ರೂಪದಲ್ಲಿ ಮುದ್ರಿಸಿ, ಶೀಘ್ರವೇ ಬಿಡುಗಡೆ ಮಾಡಲಾಗುತ್ತದೆ ಎಂದರು.

ಎರಡು ದಿನದಲ್ಲಿ ಫೈನಲ್: ಸಂಡೂರು ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿ, ಬಿಜೆಪಿಯಿಂದ 19 ಜನ ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಇನ್ನೆರಡು ದಿನಗಳಲ್ಲಿ ಟಿಕೆಟ್ ಯಾರಿಗೆ ಎಂಬುದು ಫೈನಲ್ ಆಗಲಿದೆ. ಯಾರಿಗೇ ಟಿಕೆಟ್ ಸಿಕ್ಕರೂ ಅವರನ್ನು ಗೆಲ್ಲಿಸಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸುತ್ತೇವೆ ಎಂದು ಜನಾರ್ದನರೆಡ್ಡಿ ಸ್ಪಷ್ಟವಾಗಿ ನುಡಿದರು.

ಬಳ್ಳಾರಿ ಜಿಲ್ಲೆಯಲ್ಲಿ ಓರ್ವ ಬಿಜೆಪಿ ಶಾಸಕರನ್ನು ಗೆಲ್ಲಿಸಿಕೊಡಿ. ಅಭಿವೃದ್ಧಿ ಮಾಡಿ ತೋರಿಸುತ್ತಾರೆ. ಸಂಡೂರು ಕ್ಷೇತ್ರದ ಗೆಲುವಿನಿಂದ ಬಳ್ಳಾರಿ ಜಿಲ್ಲೆಯಲ್ಲಿ `ಬಿಜೆಪಿ’ಯ ವಿಜಯದ ಪರಂಪರೆ ಪ್ರಾರಂಭವಾಗಲಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಐದೂ ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಳ್ಳಾರಿ ನಗರ ಮಾಜಿ ಶಾಸಕ ಗಾಲಿ ಸೋಮಶೇಖರರೆಡ್ಡಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಅನಿಲ್‍ನಾಯ್ಡು, ರಾಜ್ಯ ಬಿಜೆಪಿ ಕಾರ್ಯದರ್ಶಿ ಶರಣು ತಳಿಕೇರಿ, ಎಸ್‍ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರ ಹನುಮಂತು, ಮುಖಂಡರಾದ ಜಿ.ಟಿ.ಪಂಪಾಪತಿ, ದಮ್ಮೂರು ಶೇಖರ್, ನಾನಾಸಾಹೇಬ್‍ನಿಕ್ಕಂ, ರಘು, ಬಿಜೆಪಿ ಟಿಕೆಟ್ ಪ್ರಬಲ ಆಕಾಂಕ್ಷಿ ಕೆ.ಎಸ್.ದಿವಾಕರ್, ಮತ್ತಿತರೆ ಪ್ರಮುಖರು ಉಪಸ್ಥಿತರಿದ್ದರು.

News

ವಾಲ್ಮೀಕಿ ನಿಗಮದ ಹಣ ದುರ್ಬಳಕೆಯೇ ಕಾಂಗ್ರೆಸ್ ಸರ್ಕಾರದ ಹೆಗ್ಗಳಿಕೆ: ಜನಾರ್ದನರೆಡ್ಡಿ

18 Oct 2024

ಬಳ್ಳಾರಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಬಂಧಿತರಾಗಿ ನಿನ್ನೆ ಜೈಲಿನಿಂದ ಬಿಡುಗಡೆಯಾದ ರಾಜ್ಯದ ಮಾಜಿ ಸಚಿವ, ಬಳ್ಳಾರಿ ಗ್ರಾಮೀಣ ಶಾಸಕರಾದ ಬಿ.ನಾಗೇಂದ್ರ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಕೇಂದ್ರದ ಬಿಜೆಪಿ ಸರ್ಕಾರವು ಕಾಂಗ್ರೆಸ್ ಮತ್ತು ವಿಪಕ್ಷಗಳ ಸರ್ಕಾರಗಳನ್ನು ಬೀಳಿಸಲು ಪ್ರಯತ್ನ ನಡೆಸುತ್ತಿದೆ. ಆದುದರಿಂದ ವಾಲ್ಮೀಕಿ ನಿಗಮದ ಪ್ರಕರಣದಲ್ಲಿ ತಮ್ಮನ್ನು ಬಂಧಿಸಲಾಗಿದೆ ಎಂದು ನೀಡಿರುವ ಹೇಳಿಕೆಯನ್ನು ಬಿಜೆಪಿ ಧುರೀಣ, ಮಾಜಿ ಸಚಿವ ಹಾಗೂ ಗಂಗಾವತಿ ಶಾಸಕರಾದ ಜಿ.ಜನಾರ್ದನರೆಡ್ಡಿ ತೀವ್ರವಾಗಿ ಖಂಡಿಸಿದ್ದಾರೆ. ಅವರ ಹೇಳಿಕೆಯು ಬಳ್ಳಾರಿ ಜನತೆಗೆ ನಗೆ ತರಿಸುವಂತಿದೆ ಎಂದು ವ್ಯಂಗ್ಯವಾಡಿದ್ದಾರೆ.

ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಜನಾಂಗದವರ ಅಭಿವೃದ್ಧಿ ಹಾಗೂ ಏಳಿಗೆಗಾಗಿ ಈ ಹಿಂದೆ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪನವರು ವಾಲ್ಮೀಕಿ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದರು. ಆದರೆ ಇದೀಗ ವಾಲ್ಮೀಕಿ ನಿಗಮದ ಹಣವನ್ನು ದುರ್ಬಳಕೆ ಮಾಡಿಕೊಂಡಿರುವುದು ಕಾಂಗ್ರೆಸ್ ಸರ್ಕಾರದ ಹೆಗ್ಗಳಿಕೆ ಎಂದು ಟೀಕಿಸಿದರು.

ಈ ಹಿಂದೆ 2011ರ ಸೆಪ್ಟಂಬರ್‌ನಲ್ಲಿ ನನ್ನನ್ನು ಬಂಧಿಸಿ, ಜೈಲಿಗೆ ಕಳುಹಿಸಿದ್ದು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ. ಅಂತೆಯೇ 2012 ರಲ್ಲಿ ಶಾಸಕ ಬಿ.ನಾಗೇಂದ್ರ ಅವರ ಬಂಧನವಾದಾಗಲೂ ಯುಪಿಎ ಸರ್ಕಾರವೇ ಅಧಿಕಾರದಲ್ಲಿತ್ತು. 2012ರಲ್ಲಿ ಆನಂದ್‌ಸಿAಗ್, ಸುರೇಶ್ ಬಾಬು, ನಾಗೇಂದ್ರ, ಸತೀಶ್‌ಶೈಲ್ ಸೇರಿ ಐವರು ಶಾಸಕರನ್ನು ಬಂಧಿಸಲಾಗಿತ್ತು. ಯುಪಿಎ ಸರ್ಕಾರದಲ್ಲಿ ನಾಗೇಂದ್ರರ ಬಂಧನವಾಗಿ ಎರಡು ವರ್ಷ ಜೈಲಿನಲ್ಲಿದ್ದುದನ್ನು ಅವರು ಮರೆಯಬಾರದು ಎಂದು ರೆಡ್ಡಿ ಟಾಂಗ್ ನೀಡಿದರು. 

News

ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನಾ ಧರಣಿ

17 Oct 2024

ಬಳ್ಳಾರಿ: ಸುಪ್ರೀಮ್‌ಕೋರ್ಟ್ನ ತೀರ್ಪಿನಂತೆ, ರಾಜ್ಯ ಸರ್ಕಾರವು ಈ ಕೂಡಲೇ ಪರಿಶಿಷ್ಠ ಜಾತಿಯಲ್ಲಿನ `ಒಳ ಮೀಸಲಾತಿ’ಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ, ಇಂದು ಬಳ್ಳಾರಿ ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ಪರಿಶಿಷ್ಠ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನಾ ಧರಣಿ ನಡೆಸಲಾಯಿತು.

ಪರಿಶಿಷ್ಠ ಜಾತಿಗಳಲ್ಲಿ ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಅತಿ ಹೆಚ್ಚು ಹಿಂದುಳಿದಿರುವ ಜಾತಿಗಳ ಅಭಿವೃದ್ಧಿಯ ಸದುದ್ದೇಶದಿಂದ ಆಯಾ ಜಾತಿಗಳಿಗೆ ಸೇರಿದವರಿಗೆ ಮೀಸಲಾತಿ ಸೌಲಭ್ಯ ತಲುಪಲು, ಒಳಮೀಸಲಾತಿ ನೀಡುವ ಸಾಂವಿಧಾನಿಕ ಅಧಿಕಾರ ಆಯಾ ರಾಜ್ಯ ಸರ್ಕಾರಗಳಿಗಿವೆ ಎಂದು ಸುಪ್ರೀಮ್‌ಕೋರ್ಟ್ನ ಸಾಂವಿಧಾನಿಕ ಪೂರ್ಣ ಪೀಠವು ಕಳೆದ ಆ.1 ರಂದು ಐತಿಹಾಸಿಕ ತೀರ್ಪು ನೀಡಿದೆ. ಆದುದರಿಂದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಒಳ ಮೀಸಲಾತಿಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ, ಧರಣಿ ನಡೆಸಲಾಯಿತು.

ಒಳಮೀಸಲಾತಿ ಜಾರಿಗೆ ಬದ್ಧ ಎಂದು ಹೇಳುತ್ತಿರುವ ರಾಜ್ಯ ಸರ್ಕಾರವು ಎರಡೂವರೆ ತಿಂಗಳುಗಳು ಕಳೆದರೂ, ಈ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳದಿರುವುದು ನಿಜಕ್ಕೂ ದುರದೃಷ್ಟಕರ. ಸುಪ್ರೀಮ್‌ಕೋರ್ಟ್ ತೀರ್ಪನ್ನು ತಕ್ಷಣವೇ ರಾಜ್ಯ ಸರ್ಕಾರವು ಜಾರಿಗೆ ತರಬೇಕು. ಈ ತಿಂಗಳೊಳಗಡೆ ಜಾರಿಗೊಳಿಸದಿದ್ದಲ್ಲಿ ಹೋರಾಟ ಸಮಿತಿಯು ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸಲಿದೆ. ಈ ಕುರಿತಂತೆ ನಿರ್ಲಕ್ಷö್ಯ ತೋರಿದಲ್ಲಿ, ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಪಾಠ ಕಲಿಸಬೇಕಾಗುತ್ತದೆ ಎಂದು ಸಮಿತಿಯು ಎಚ್ಚರಿಸಿದೆ.

ಪರಿಶಿಷ್ಠ ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ಹೆಚ್.ಹನುಮಂತಪ್ಪ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಜನ ಕಾರ್ಯಕರ್ತರು, ಮುಖಂಡರು ಹಾಗೂ ವಿವಿಧ ದಲಿತಪರ ಸಂಘಟನೆಗಳ ಧುರೀಣರು ಪಾಲ್ಗೊಂಡಿದ್ದರು. ರಾಜ್ಯ ಸರ್ಕಾರವು ಕೂಡಲೇ ಒಳಮೀಸಲಾತಿ ಜಾರಿಗೆ ತರುವಂತೆ ಆಗ್ರಹಿಸಿ, ಘೋಷಣೆಗಳನ್ನು ಕೂಗಿದರು.