

19th May 2026

ಬಳ್ಳಾರಿ, ಮೇ 19: ಕಂಪ್ಲಿ ತಾಲೂಕಿನ ಶ್ರೀರಾಮರಂಗಾಪುರ ಗ್ರಾಮದ 101 ದಲಿತ ಕುಟುಂಬಗಳಿಗೆ ಶೀಘ್ರ ವಸತಿ ನಿವೇಶನ ಮಂಜೂರು ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.
2014-15ನೇ ಸಾಲಿನಲ್ಲಿ ಗ್ರಾಮದ ಭೀಮನೇನಿ ಸೋಮಪ್ಪ ಅವರ ವಶದಲ್ಲಿದ್ದ 135 ಎಕರೆ ಜಮೀನನ್ನು ಹೋರಾಟದ ಮೂಲಕ ಕಂದಾಯ ಇಲಾಖೆಯಿಂದ ಬಿಡುಗಡೆಗೊಳಿಸಲಾಗಿತ್ತು. ಆ ಸಂದರ್ಭದಲ್ಲಿ ಗ್ರಾಮದಲ್ಲಿನ ದಲಿತ ಸಮುದಾಯ ಆರ್ಥಿಕ ಬಹಿಷ್ಕಾರಕ್ಕೆ ಒಳಗಾಗಿದ್ದು, ಸರ್ಕಾರದಿಂದ ಆರ್ಥಿಕ ಭದ್ರತೆ, ನೇರ ಸಾಲ ಹಾಗೂ ವಸತಿ ನಿವೇಶನ ನೀಡುವಂತೆ ಬೇಡಿಕೆ ಇಡಲಾಗಿತ್ತು ಎಂದು ಸಂಘಟನೆಯ ಮುಖಂಡರು ತಿಳಿಸಿದ್ದಾರೆ.
ಈ ಹಿಂದೆ ಆದಿ ಜಾಂಬವ ನಿಗಮದಿಂದ 86 ಕುಟುಂಬಗಳಿಗೆ ತಲಾ ₹1 ಲಕ್ಷ ನೇರ ಸಾಲ ಮಂಜೂರಾಗಿದ್ದರೂ, ವಸತಿ ನಿವೇಶನ ಮಂಜೂರಿನ ವಿಚಾರದಲ್ಲಿ ಇದುವರೆಗೆ ಯಾವುದೇ ಪ್ರಗತಿ ಕಂಡಿಲ್ಲ ಎಂದು ಆರೋಪಿಸಿದರು.
ಗ್ರಾಮದಲ್ಲಿ ಜನಸಂಖ್ಯೆ ಹೆಚ್ಚಳದಿಂದ ಹಲವಾರು ಕುಟುಂಬಗಳು ಒಂದೇ ಮನೆಯಲ್ಲಿ ವಾಸಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಮಳೆಗಾಲದಲ್ಲಿ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ.
ವಾಸಿಸಲು ಸೂಕ್ತ ಜಾಗದ ಕೊರತೆಯಿಂದ ಕುಟುಂಬಗಳು ಸಂಕಷ್ಟದ ಜೀವನ ನಡೆಸುತ್ತಿರುವುದಾಗಿ ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಇದೇ ವೇಳೆ ಗ್ರಾಮಸ್ಥರು ಡಾ. ಗುರುಮೂರ್ತಿ ಅವರ ಜಮೀನನ್ನು ವಸತಿ ನಿವೇಶನಕ್ಕಾಗಿ ಖರೀದಿಸಲು ಮಾತುಕತೆ ನಡೆಸಿದ್ದು, ಸುಮಾರು 3 ಎಕರೆ 94 ಸೆಂಟ್ಸ್ ಭೂಮಿಗೆ ₹2.56 ಕೋಟಿ ವೆಚ್ಚವಾಗಲಿದೆ ಎಂದು ತಿಳಿಸಿದ್ದಾರೆ.
ಇಷ್ಟೊಂದು ಮೊತ್ತವನ್ನು ಬಡ ಕುಟುಂಬಗಳು ಭರಿಸಲು ಸಾಧ್ಯವಿಲ್ಲದ ಕಾರಣ ಸರ್ಕಾರವೇ ಮಧ್ಯಪ್ರವೇಶಿಸಿ ನಿವೇಶನ ಮಂಜೂರು ಮಾಡಿಸಬೇಕೆಂದು ಒತ್ತಾಯಿಸಿದರು.
ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಕರಿಯಪ್ಪ ಗುಡಿಮನಿ ಮಾತನಾಡಿ, ಜಿಲ್ಲಾಧಿಕಾರಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆ ಸರ್ಕಾರಕ್ಕೆ ಶಿಫಾರಸು ಸಲ್ಲಿಸಿ ಶೀಘ್ರ ವಸತಿ ನಿವೇಶನ ಮಂಜೂರು ಮಾಡಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ರಾಮಕೃಷ್ಣ, ನೀಲಪ್ಪ ಪೇಂಟರ್, ಸೋಮಯ್ಯ, ಈರಣ್ಣ, ವೆಂಕಟಸ್ವಾಮಿ, ಕೃಷ್ಣ, ಪೆದ್ದಣ್ಣ, ಮೋಹನ್ ರಾಜ್, ನವೀನ್ ಕುಮಾರ್, ಮಲ್ಲಮ್ಮ, ಲಕ್ಷ್ಮಿ, ಸರಸ್ವತಿ, ಸರೋಜಮ್ಮ ಸೇರಿದಂತೆ ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದರು.

ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ವಾಗ್ದಾಳಿ “ಮೂರು ವರ್ಷದ ಸಾಧನೆ ಎಂದರೆ ನೂರು ಸುಳ್ಳಿನ ಸಮಾವೇಶ” ಆರೋಪ