

26th May 2026

ಬಕ್ರೀದ್ ಹಬ್ಬ ಶಾಂತಿಯುತ ಆಚರಣೆಗೆ ಜಿಲ್ಲಾಡಳಿತ ಸಜ್ಜು
“ಸೌಹಾರ್ದತೆ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ” – ಎಸ್ಪಿ ಡಾ. ಸುಮನ್ ಡಿ. ಪೆನ್ನೆಕರ್
ಬಳ್ಳಾರಿ, ಮೇ 26: ಮುಂಬರುವ ಬಕ್ರೀದ್ ಹಬ್ಬವನ್ನು ಜಿಲ್ಲೆಯಾದ್ಯಂತ ಶಾಂತಿಯುತ, ಸೌಹಾರ್ದಯುತ ಹಾಗೂ ಕಾನೂನುಬದ್ಧವಾಗಿ ಆಚರಿಸುವ ನಿಟ್ಟಿನಲ್ಲಿ ಬಳ್ಳಾರಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಮಹತ್ವದ ಶಾಂತಿ ಸಭೆಯನ್ನು ಆಯೋಜಿಸಲಾಯಿತು. ಸಭೆಯಲ್ಲಿ ಬಳ್ಳಾರಿ ವಲಯದ ಮಾನ್ಯ ಪೊಲೀಸ್ ಮಹಾನಿರೀಕ್ಷಕರು ಉಪಸ್ಥಿತರಿದ್ದು, ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಮುಸ್ಲಿಂ ಮುಖಂಡರು, ಧಾರ್ಮಿಕ ನಾಯಕರು ಹಾಗೂ ಸಮಾಜದ ಗಣ್ಯರೊಂದಿಗೆ ಸಮಗ್ರ ಚರ್ಚೆ ನಡೆಸಲಾಯಿತು.
ಸಭೆಯ ನೇತೃತ್ವ ವಹಿಸಿದ್ದ ಬಳ್ಳಾರಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಸುಮನ್ ಡಿ. ಪೆನ್ನೆಕರ್ ಅವರು ಮಾತನಾಡಿ, ಬಕ್ರೀದ್ ಹಬ್ಬವು ತ್ಯಾಗ, ಸಹೋದರತ್ವ ಮತ್ತು ಮಾನವೀಯ ಮೌಲ್ಯಗಳ ಸಂಕೇತವಾಗಿದ್ದು, ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಮತ್ತಷ್ಟು ಬಲಪಡಿಸುವ ರೀತಿಯಲ್ಲಿ ಆಚರಣೆ ನಡೆಯಬೇಕು ಎಂದು ಹೇಳಿದರು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುಳ್ಳು ಸುದ್ದಿಗಳು, ಪ್ರಚೋದನಕಾರಿ ಸಂದೇಶಗಳು ಹಾಗೂ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಮನವಿ ಮಾಡಿದರು.
ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಈಗಾಗಲೇ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುತ್ತದೆ ಎಂದು ಎಸ್ಪಿ ತಿಳಿಸಿದರು. ಹಬ್ಬದ ಸಂದರ್ಭದಲ್ಲಿ ಮೆರವಣಿಗೆ, ಸಾರ್ವಜನಿಕ ಪ್ರಾರ್ಥನೆ ಹಾಗೂ ಇತರೆ ಧಾರ್ಮಿಕ ಕಾರ್ಯಕ್ರಮಗಳು ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ನಡೆಯಬೇಕೆಂದು ಸೂಚನೆ ನೀಡಿದರು.
ಯಾವುದೇ ಸಮಸ್ಯೆ ಅಥವಾ ಅನುಮಾನಾಸ್ಪದ ಚಟುವಟಿಕೆ ಕಂಡುಬಂದಲ್ಲಿ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಸಭೆಯಲ್ಲಿ ಭಾಗವಹಿಸಿದ್ದ ಮುಸ್ಲಿಂ ಮುಖಂಡರು ಕೂಡ ಪೊಲೀಸ್ ಇಲಾಖೆಯೊಂದಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಮತ್ತು ಸೌಹಾರ್ದತೆಯನ್ನು ಕಾಪಾಡುವಲ್ಲಿ ಸಮುದಾಯದ ಎಲ್ಲರೂ ಕೈಜೋಡಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು, ವಿವಿಧ ಠಾಣೆಗಳ ಪೊಲೀಸ್ ಅಧಿಕಾರಿಗಳು, ಸಮಾಜದ ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಬಾಲ್ಯವಿವಾಹ ಹಾಗೂ ಅಪ್ರಾಪ್ತರ ಗರ್ಭಧಾರಣೆ ತಡೆಗೆ ಕಠಿಣ ಕ್ರಮಕ್ಕೆ ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ

ಹುಲಿಯಪ್ಪ ಮತ್ತು ಇತರರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಿ ; ಕೊಳಗಲ್ಲು ಗ್ರಾಮಸ್ಥರ ಒತ್ತಾಯ

ಬಳ್ಳಾರಿ: ರಾಷ್ಟೀಯ ಹೆದ್ದಾರಿ 150-ಎ ರಸ್ತೆಯ ಸೇತುವೆ ಮರು ನಿರ್ಮಾಣ; 60 ದಿನಗಳ ಕಾಲ ವಾಹನ ಸಂಚಾರ ಮಾರ್ಗ ಬದಲಾವಣೆ