

23rd December 2024

ಮಂಡ್ಯ: ಮಧು ಜಿ.ಮಾದೇಗೌಡ ಅವರ ಅಭಿಮಾನಿಗಳ ಬಳಗದ ವತಿಯಿಂದ ವಿಧಾನ ಪರಿಷತ್ ಸದಸ್ಯ ಹಾಗೂ ಭಾರತಿ ಎಜುಕೇಷನ್ ಟ್ರಸ್ಟ್ನ ಅಧ್ಯಕ್ಷ ಮಧು ಜಿ.ಮಾದೇಗೌಡ ಅವರ ೬೦ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಷಷ್ಟ್ಯಬ್ಧಿ ಸಮಾರಂಭವನ್ನು ಡಿಸೆಂಬರ್ ೨೪ರಂದು ಮಧ್ಯಾಹ್ನ ೦೧ ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಕಾರ್ಯಪಾಲಕ ಅಭಿಯಂತರ ಹಾಗೂ ಅಭಿಮಾನಿ ಬಳಗದ ಬಸವರಾಜೇಗೌಡ ತಿಳಿಸಿದರು.
ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಹೊರವಲಯದಲ್ಲಿನ ಎ & ಎ ಕನ್ವೆಂಷನ್ ಹಾಲ್ನಲ್ಲಿ ನಡೆಯಲಿರುವ ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ವಹಿಸಲಿದ್ದು. ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆ ವಹಿಸುವರು ಎಂದರು.
ಶಾಸಕ ರವಿಕುಮಾರ್ಗೌಡ ಹಾಗೂ ವಿಧಾನ ಪರಿಷತ್ ಸದಸ್ಯ ದಿನೇಶ್ಗೂಳಿಗೌಡ ಅವರು ಮಧು ಜಿ.ಮಾದೇಗೌಡ ದಂಪತಿಗಳನ್ನು ಅಭಿನಂದಿಸಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್ಗೌಡ ಭಾಗವಹಿಸುವರು. ಮಧು ಜಿ.ಮಾದೇಗೌಡ ಮತ್ತು ಬಿಂದು ಮಧು ಜಿ.ಮಾದೇಗೌಡ ಉಪಸ್ಥಿತರಿರುವರು ಎಂದು ವಿವರಿಸಿದರು.
ಡಾ.ಜಿ.ಮಾದೇಗೌಡ ಅವರ ಕುರಿತು ಡಾ.ಮ.ರಾಮಕೃಷ್ಣ ಅವರು ಹಿನ್ನೋಟ ನುಡಿಗಳನ್ನಾಡಲಿದ್ದು, ಮಧು ಜಿ.ಮಾದೇಗೌಡ ಅವರ ಕುರಿತು ಡಾ.ಎಸ್.ಬಿ.ಶಂಕರಗೌಡ ಮುನ್ನೋಟದ ನುಡಿಗಳನ್ನು ನುಡಿವರು, ಮಧು ಜಿ.ಮಾದೇಗೌಡ ಅವರ ಜೀವನ ಮತ್ತು ಸಾಧನೆ ಕುರಿತು ಡಾ.ಕೆಂಪಮ್ಮ ಅವರು ರಚಿಸಿದ `ಮಕರಂದ' ಪುಸ್ತಕವನ್ನು ಇದೇ ವೇಳೆ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ಮಧ್ಯಾಹ್ನ ೦೨ಗಂಟೆಗೆ ಬೆಂಗಳೂರಿನ ಗಾಂಧಿ ಸ್ಮಾರಕ ನಿಧಿಯ ನಿರ್ದೇಶಕ ಪ್ರೊ.ಜಿ.ಬಿ.ಶಿವರಾಜ್ ಅವರು ಅಭಿನಂದನಾ ನುಡಿಗಳನ್ನಾಡಲಿದ್ದು, ಮಧು ಜಿ.ಮಾದೇಗೌಡ ದಂಪತಿಗಳೂ ಗೌರವ ಸ್ವೀಕರಿಸಲಿದ್ದಾರೆ. ಸದರಿ ಕಾರ್ಯಕ್ರಮದ ನಿರ್ವಹಣೆಯನ್ನು ಶ್ವೇತಾ ಎಂ.ಯು ನಡೆಸಿಕೊಡಲಿದ್ದಾರೆ. ಮಧು ಜಿ.ಮಾದೇಗೌಡ ಅವರ ವಿಧಾನ ಪರಿಷತ್ ವ್ಯಾಪ್ತಿಯ ಜಿಲ್ಲೆಗಳಿಂದ ಎಸ್ಎಸ್ಎಲ್ಸಿ ಮತ್ತು ಪಿಯುಸಿಯ ೨೦ ಮಂದಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದರು.
ಮಧು ಜಿ.ಮಾದೇಗೌಡರ ಹುಟ್ಟುಹಬ್ಬದ ಅಂಗವಾಗಿ ವಾರಪೂರ್ತಿ ಸಮಾಜಮುಖ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಡಿ.೨೬ರಂದು ಭಾರತೀನಗರದ ಭಾರತೀ ಕಾಲೇಜಿ (ಕಲ್ಲು ಕಟ್ಟಡದ ಒಳಾಂಗಣ)ನಲ್ಲಿ ಬೃಹತ್ ಉದ್ಯೋಗ ಮೇಳ, ಡಿ.೨೭ರಂದು ಮದ್ದೂರು ತಾಲ್ಲೂಕು ಕ್ರೀಡಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮದ್ದೂರು ಪುರಸಭೆ, ಆಸ್ಟರ್ ಜಿ.ಮಾದೇಗೌಡ ಹಾಸ್ಪಿಟಲ್, ಶಂಕರ್ ಕಣ್ಣಿನ ಆಸ್ಪತ್ರೆಯ ಸಂಯುಕ್ತಾಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ, ಡಿ.೨೮ ಮತ್ತು ೨೯ರಂದು ರಾಜ್ಯಮಟ್ಟದ ಮುಕ್ತ ಹೊನಲು ಬೆಳಕಿನ ಪುರುಷರ ವಾಲಿಬಾಲ್ ಎಂ.ಜಿ.ಎಂ ಕಪ್ ಪಂದ್ಯಾವಳಿಯನ್ನು ಭಾರತೀನಗರದ ಭಾರೀ ಕ್ರೀಡಾಂಗಣದಲ್ಲಿ ಆಯೊಜನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಗೋಷ್ಠಿಯಲ್ಲಿ ನೆಲದನಿ ಸಂಘಟನೆಯ ರಮೇಶ್, ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ತಿಮ್ಮೇಗೌಡ, ಸಂಘದ ರವೀಂದ್ರ, ಒಕ್ಕಲಿಗರ ಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುಜಾತಕೃಷ್ಣ, ಎಸ್.ನಾರಾಯಣ್, ನಾಗರಾಜ್ ಸ್ವರೂಪ್ ಇದ್ದರು.

ಪ್ರಧಾನ ಜಿಲ್ಲಾ ನ್ಯಾಯಾಧೀಶ ಸಿ.ಚಂದ್ರಶೇಖರ ವರ್ಗಾವಣೆ- ಕೊಪ್ಪಳ ನ್ಯಾಯಾಲಯಕ್ಕೆ ಲತಾಕುಮಾರಿ.ಎಂ ನಿಯೋಜನೆ

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ