ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 12ನೇ ವಾರ್ಷಿಕ ಘಟಿಕೋತ್ಸವ ಡಿ.3 ರಂದು ವಿಟಿಯು ಡಾ. ಎಪಿಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ನಡೆಯಲಿದೆ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸಿ.ಎಂ.ತ್ಯಾಗರಾಜ್ ಹೇಳಿದರು.ಸೋಮವಾರ ಬೆಳಗಾವಿ ಸಂಗೋಳಿ ರಾಯಣ್ಣ ಕಾಲೇಜಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಣಿ ಚನ್ನಮ್ಮ ವಿವಿಯ 12ನೇ ಘಟಿಕೋತ್ಸವದ ಅಧ್ಯಕ್ಷತೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಲ್ಲೋಟ್ ವಹಿಸಲಿದ್ದಾರೆ. ಘಟಿಕೋತ್ಸವದ ಭಾಷಣವನ್ನು ಮಾಜಿ ಹಿರಿಯ ಅಧಿಕಾರಿ, ಯು.ಎನ್.ಆಹಾರ ಮತ್ತು ಕೃಷಿ ಸಂಸ್ಥೆ ನಿಟ್ಟೆ ವಿವಿ ಮಂಗಳೂರಿನ ಡಾ. ಇಡ್ಯಾ ಕರುಣಾಸಾಗರ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ ಆಗಮಿಸಲಿದ್ದಾರೆ ಎಂದರು.
ವಿವಿಧ ಕ್ಷೇತ್ರದಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ಮೂವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಲಾಗುವುದು. ಪ್ರದರ್ಶನಗಳ ಕಲೆ ಕ್ಷೇತ್ರದಲ್ಲಿ ಪದ್ಮಶ್ರೀ ಪಂಡಿತ್ ಎಸ್.ಬಾಲೇಶ್ ಭಜಂತ್ರಿ ಅವರಿಗೆ, ಉದ್ಯಮಶೀಲತೆ ಮತ್ತು ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಗೋಪಾಲ್ ಜಿನಗೌಡ, ನಾಗರಿಕ ಕ್ರೀಡೆ ಲೋಕೋಪಕಾರಿ ಸೇವಾ ಕ್ಷೇತ್ರದಲ್ಲಿ ಗೋಪಾಲ್ ಹೊಸುರ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಲಾಗುವುದು. ವಿವಿಧ ವಿಭಾಗದಲ್ಲಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿ ಪ್ರಮಾಣ ನೀಡಲಾಗುವುದು ಎಂದರು.





