3rd February 2025

ಜಿಲ್ಲೆಯಲ್ಲಿ ಬಾಣಂತಿಯರು ಹಾಗೂ ಹಸುಗೂಸುಗಳ ಸಾವನ್ನು ತಡೆಗಟ್ಟಿ- ಎಸ್ಯುಸಿಐ (ಸಿ)
ಜಿಲ್ಲೆಯಲ್ಲಿ ಬಾಣಂತಿಯರು ಹಾಗೂ ಹಸುಗೂಸುಗಳ ಸಾವನ್ನು ತಡೆಗಟ್ಟಲು ಹಾಗೂ ಬೆಳಗಾವಿಯ ಜಿಲ್ಲಾಸ್ಪತ್ರೆ ಸೇರಿದಂತೆ ಎಲ್ಲಾ ಹಂತದ ಆಸ್ಪತ್ರೆಗಳಲ್ಲಿ ಉಚಿತ ಹಾಗೂ ಗುಣಮಟ್ಟದ ಚಿಕಿತ್ಸೆ ಒದಗಿಸಲು, ಆರೋಗ್ಯ ಕ್ಷೇತ್ರದ ಖಾಸಗೀಕರಣ ನಿಲ್ಲಿಸಲು ಆಗ್ರಹಿಸಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ-ಕಮ್ಯುನಿಸ್ಟ್ (ಎಸ್.ಯು.ಸಿ.ಐ-ಸಿ) ಪಕ್ಷ ಹಾಗೂ ಅಖಿಲ ಭಾರತ ರೈತ ಕೃಷಿ-ಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್) ಗಳ ವತಿಯಿಂದ ಬೆಳಗಾವಿಯಲ್ಲಿ ಇಂದು ಬೃಹತ್ ಪ್ರತಿಭಟನೆ ಮಾಡಲಾಯಿತು. ಪ್ರತಿಭಟನಾಕಾರರು ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನವನದಿಂದ ಜಿಲ್ಲಾಧಿಕಾರಿ ಕಛೇರಿವರೆಗೆ ಪ್ರತಿಭಟನಾ ರ್ಯಾಲಿ ಮೂಲಕ ಬಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕುಗಳಿಂದ, ಬಡಾವಣೆಗಳಿಂದ. ಹಳ್ಳಿಗಳಿಂದ ನಾಗರಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಎಸ್.ಯು.ಸಿ.ಬಿ ಕಮ್ಯುನಿಸ್ಟ್ ಪಕ್ಷದ ರಾಜ್ಯ ಸಮಿತಿ ಸದಸ್ಯರಾದ ರಾಮಾಂಜನಪ್ಪ ಅಲ್ಬಳ್ಳಿ ಮಾತನಾಡಿ, ರಾಜ್ಯದ ಸರ್ಕಾರಿ ಆರೋಗ್ಯ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಇತ್ತೀಚಿನ ದಿನಗಳಲ್ಲಿ ಕಳಪೆ ಗುಣಮಟ್ಟದ ಔಷಧಿಗಳು ಹಾಗೂ ವೈದ್ಯಕೀಯ ನಿರ್ಲಕ್ಷದಿಂದಾಗಿ ಬೆಳಗಾವಿ, ಬಳ್ಳಾರಿ, ಚಿಗಟೇರಿ, ಸಿದ್ದಾಪುರ ಹಲವಾರು ಕಡೆ ಬಾಣಂತಿಯರು ಮತ್ತು ನೂರಾರು ಹಸುಗೂಸುಗಳು ಸಾವನ್ನಪ್ಪಿವೆ. ಹಲವಾರು ಆಸ್ಪತ್ರೆಗಳಲ್ಲಿ ಅವಶ್ಯಕ ನುರಿತ ವೈದ್ಯರು, ವೈದ್ಯಕೀಯ ಸಿಬ್ಬಂದಿ ಹಾಗೂ ಮೂಲಭೂತ ಸೌಕರ್ಯಗಳೇ ಇಲ್ಲ. ರಾಜ್ಯದಲ್ಲಿ ಔಷಧಿಗಳ ಕೊರತೆಯಂತೂ ವಿಪರೀತವಾಗಿದೆ. ಅವಶ್ಯಕತೆಯ ಶೇಕಡ 30ರಷ್ಟು ಮಾತ್ರ ಔಷಧಗಳು ಉಗ್ರಾಣದಲ್ಲಿರುವುದು ಇತ್ತೀಚೆಗೆ ವರದಿಯಾಗಿದೆ. ಆದರೆ ಸಮರ್ಪಕ ಔಷಧಿಗಳ ಪೂರೈಕೆಗೆ ಯಾವುದೇ ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡಿಲ್ಲ. ಇದು ಸರ್ಕಾರಗಳ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಬಗೆಗಿನ ನಿಷ್ಕಾಳಜಿಯನ್ನು ತೋರಿಸುತ್ತದೆ. ವ್ಯತಿರಿಕ್ತವಾಗಿ ವರ್ಷದಿಂದ ವರ್ಷಕ್ಕೆ ರಾಜ್ಯ, ಕೇಂದ್ರ ಸರ್ಕಾರಗಳು ಆರೋಗ್ಯ ಕ್ಷೇತ್ರಕ್ಕೆ ಬಜೆಟ್ ನಲ್ಲಿ ಅನುದಾನವನ್ನು ಕಡಿತಗೊಳಿಸುತ್ತಾ ಬರುತ್ತಿವೆ. ಈ ಮೂಲಕ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವ ಬದಲು ದುರ್ಬಲಗೊಳಿಸುತ್ತಾ ಖಾಸಗಿಕರಣಕ್ಕೆ ದೂಡುತ್ತಿರುವುದು ಸ್ಪಷ್ಟವಾಗಿ ಕಾಣುತ್ತದೆ.
ಅಖಿಲ ಭಾರತ ರೈತ ಕೃಷಿ-ಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್) ಯ ರಾಜ್ಯ ಉಪಾಧ್ಯಕ್ಷರಾದ ಲಕ್ಷ್ಮಣ ಜಡಗನ್ನವರ ಮಾತನಾಡಿ, ಬೆಳಗಾವಿ ಜಿಲ್ಲೆಯಾದ್ಯಂತ ಸರ್ಕಾರಿ ಆಸ್ಪತ್ರೆಗಳು ಸಮಸ್ಯೆಗಳ ಆಗರಗಳಾಗಿವೆ. PHC ಗಳಿಂದ ಹಿಡಿದು BIMS ವರೆಗೂ ಸಾಕಷ್ಟು ಸಮಸ್ಯೆಗಳಿವೆ. ಅವಶ್ಯಕತೆ ಇರುವಷ್ಟು ನುರಿತ ವೈದ್ಯರ, ದಾದಿಯರ, ಮತ್ತಿತರ ವೈದ್ಯಕೀಯ ಸಿಬ್ಬಂದಿಗಳ ಹಾಗೂ ಆಧುನಿಕ ಯಂತ್ರೋಪಕರಣಗಳ ಕೊರತೆಯಿದೆ. ಬಿಪಿಎಲ್ ಕಾರ್ಡ್ ದಾರರಿಗೆ ಉಚಿತ ಸ್ಕ್ಯಾನಿಂಗ್, ರಕ್ತ ಪರೀಕ್ಷೆ, ಸರ್ಜರಿ ಸೇರಿದಂತೆ ಇತರೆ ಉಚಿತ ತಪಾಸಣೆಗಳಿಗೆ ಇದ್ದ ಅವಕಾಶಕ್ಕೂ ಇದೀಗ ಕತ್ತರಿ ಬಿದ್ದಿದೆ. ಸರ್ಕಾರದ ನೀತಿಯಂತೆ ಆರ್ಥಿಕ ಸಂಕಷ್ಟದ ನೆಪವೊಡ್ಡಿ ಬಡರೋಗಿಗಳಿಂದ ಚೀಟಿ, ತಪಾಸಣೆ, ಸ್ಕ್ಯಾನಿಂಗ್, ಸರ್ಜರಿ ಪ್ರತಿಯೊಂದಕ್ಕೂ ಹಣ ವಸೂಲಿ ಮಾಡುತ್ತಿದ್ದಾರೆ. ಇನ್ನೊಂದೆಡೆ ಚೀಟಿ, ಔಷಧಿ ಮತ್ತು ಹಣ ಪಾವತಿ ಕೌಂಟರ್ಗಳ ಸಂಖ್ಯೆ ಕಡಿಮೆ ಇರುವುದರಿಂದ ದಿನವಿಡಿ ನೂರಾರು ರೋಗಿಗಳು ಪಾಳಿಯಲ್ಲಿ ನಿಲ್ಲುವ ಪರಿಸ್ಥಿತಿಯಿದೆ. ಬಡರೋಗಿಗಳು ತಮ್ಮ ದಿನಗೂಲಿ ಬಿಟ್ಟು ಸಣ್ಣಪುಟ್ಟ ರೋಗಗಳಿಗೂ ವಾರಗಟ್ಟಲೆ ಆಸ್ಪತ್ರೆಗೆ ಅಲೆದಾಡುವಂತಾಗಿದೆ. ಆಸ್ಪತ್ರೆಯ ಔಷಧಾಲಯಗಳಲ್ಲಿ ಉತ್ತಮ ಗುಣಮಟ್ಟದ ಔಷಧಿ ಪೂರೈಕೆಯಾಗುತ್ತಿಲ್ಲ. ಬದಲಾಗಿ ವೈದ್ಯರು. ಹೊರಗಿನ ಮೆಡಿಕಲ್ ಔಷಧಿ ಸೂಚಿಸುತ್ತಾರೆ. ಅವುಗಳನ್ನು ಕೊಳ್ಳುವ ಶಕ್ತಿ ಬಡವರಿಗಿದೆಯೇ? ಪರಿಣಾಮವಾಗಿ ಆರೋಗ್ಯ ರಕ್ಷಣೆಗೆ ಬರುವ ರೋಗಿಗಳು ಮತ್ತಷ್ಟು ಆನಾರೋಗ್ಯ ಪೀಡಿತರಾಗುವಂತಹ ಪರಿಸ್ಥಿತಿ ಎದುರಾಗಿದೆ. ಇದರಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ಹಲವಾರು ಬಾಣಂತಿಯರು ಹಾಗೂ ನವಜಾತ ಶಿಶುಗಳ ಮರಣ ಸಂಭವಿಸಿವೆ. ಆದ್ದರಿಂದ ಕೂಡಲೇ ಜಿಲ್ಲಾಡಳಿತ ಈ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಮಹ್ಮದ ರೋಷನ್ ರವರು, ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲಿಸುವುದಾಗಿ ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿ,ಇ,ಒ ಮತ್ತು ಸಂಘಟನೆಯ ಪ್ರತಿನಿದಿಗಳೊಂದಿಗೆ ಅದಷ್ಟು ಬೇಗ ಸಭೆ ನಡೆಸಿ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಆಶ್ವಾಸನೆಯನ್ನು ನೀಡಿದರು.
ಸಂಘಟನೆಗಳ ನಾಯಕರಾದ ರಾಜು ಗಾಣಗಿ, ಲಕ್ಕಪ್ಪ ಬಿಜ್ಜನ್ನವರ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಪಕ್ಷದ ಸದಸ್ಯರು, ಕಾರ್ಯಕರ್ತರು, ಜಿಲ್ಲೆಯ ವಿವಿಧ ಭಾಗಗಳಿಂದ ಬಂದ ನಾಗರಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ವಂದನೆಗಳೊಂದಿಗೆ ರಾಜು ಗಾಣಗಿ
SUCI-C
: 8867550883

ಪ್ರಧಾನ ಜಿಲ್ಲಾ ನ್ಯಾಯಾಧೀಶ ಸಿ.ಚಂದ್ರಶೇಖರ ವರ್ಗಾವಣೆ- ಕೊಪ್ಪಳ ನ್ಯಾಯಾಲಯಕ್ಕೆ ಲತಾಕುಮಾರಿ.ಎಂ ನಿಯೋಜನೆ

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ